ಚಿಕ್ಕಮಗಳೂರು: ಹಿಂದುಳಿದ ವರ್ಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಹಲವು ನ್ಯೂನತೆಗಳಿದ್ದು, ಸಮೀಕ್ಷಾ ದಾರರು ಎದುರಿಸುತ್ತಿರುವ ಸವಾಲುಗಳನ್ನು ಮುಖ್ಯಮಂತ್ರಿ ಕೂಡಲೇ ಪರಿಹರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮುಖ್ಯಮಂತ್ರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ.
ಕೆಲವೆಡೆ ಗಣತಿದಾರರಿಗೆ ಸ್ಥಳ ನಿಯುಕ್ತಿ ಸೇರಿ ಸಮೀಕ್ಷೆಯ ಮಾಹಿತಿ ಸಂಗ್ರಹಿಸಲು ನಿಗದಿಪಡಿಸಿರುವ ಅಪ್ಲಿಕೇಷನ್ ಸರಿಯಾಗಿ ಕಾರ್ಯ ನಿರ್ವಹಿಸದಿರುವುದು ಮತ್ತು ಗುಡ್ಡಗಾಡು ಪ್ರದೇಶದಲ್ಲಿ ನೆಟ್ವರ್ಕ್ ಸರಿಯಾಗಿ ಲಭ್ಯವಾಗದೆ ಇರುವುದರಿಂದ ಶಿಕ್ಷಕರು ಸಮಸ್ಯೆಗೆ ಈಡಾಗಿದ್ದಾರೆ. ಸಮೀಕ್ಷೆಗೆ ಸರಿಯಾದ ಪೂರ್ವ ತಯಾರಿ, ಯೋಜನೆ ಮತ್ತು ತಾಂತ್ರಿಕ ವ್ಯವಸ್ಥೆ ರೂಪಿಸಿಲ್ಲ. ಪ್ರಾಯೋಗಿಕವಾಗಿ ನಡೆಸಿ, ಅದರ ಅನುಭವದ ಮೇಲೆ ಸಂಪೂರ್ಣ ಸಮೀಕ್ಷಾ ಕಾರ್ಯವನ್ನು ಆರಂಭಿಸಬೇಕಾಗಿತ್ತು. ಆದರೆ, ಇಲ್ಲಿ ಇದ್ಯಾವುದನ್ನು ಮಾಡಿದಂತೆ ಕಾಣಿಸುತ್ತಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಸಮೀಕ್ಷೆದಾರರು ತಾಂತ್ರಿಕ ಹಾಗೂ ಪ್ರಾಯೋಗಿಕ ತೊಂದರೆಗಳಿಂದ ಗೊಂದಲಕ್ಕೀಡಾಗಿದ್ದಾರೆ. ಸಮೀಕ್ಷೆಯ ಸಮರ್ಪಕ ಪೂರ್ವತಯಾರಿ ಹಾಗೂ ತಾಂತ್ರಿಕ ಸೌಲಭ್ಯಗಳ ಕೊರತೆಯಿಂದ, ನಿರೀಕ್ಷಿತ ರೀತಿಯಲ್ಲಿ ಕಾರ್ಯ ಸಾಗುತ್ತಿಲ್ಲ. ಸಮೀಕ್ಷೆಯಲ್ಲಿ ಮನೆಗಳ ನಿಖರವಾಗಿ ಗುರುತಿಸಿಲ್ಲ. ಕೆಲವೊಮ್ಮೆ ಒಂದೇ ಮನೆಯನ್ನು ಎರಡು ಬಾರಿ ದಾಖಲು ಮಾಡುವ ಪರಿಸ್ಥಿತಿಯೂ ಎದು ರಾಗುತ್ತಿದೆ. ಕೆಲವು ಮನೆಗಳು ತಪ್ಪಿಹೋಗು ತ್ತಿರುವುದು ಕಂಡು ಬಂದಿದೆ. ಮನೆ ಗುರುತಿಸಲು ನೀಡಲಾಗಿರುವ ಯುಎಚ್ಐಡಿ ಸಂಖ್ಯೆಯ ಮೂಲಕ ಮಾಹಿತಿ ಹುಡುಕು ವಲ್ಲಿ ತಾಂತ್ರಿಕ ದೋಷ ಕಂಡುಬರುತ್ತಿವೆ. ಇದು ಗಣತಿದಾರರ ಸಮಯ ಮತ್ತು ಶ್ರಮ ವನ್ನು ವ್ಯರ್ಥಗೊಳಿಸುತ್ತಿದೆ ಎಂದಿದ್ದಾರೆ.
ಸಮೀಕ್ಷೆ ಸಂಪೂರ್ಣ ಆನ್ಲೈನ್ ಆಗಿರುವುದರಿಂದ ಗುಡ್ಡಗಾಡು ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಯಿದೆ. ಒಟಿಪಿ ಸರಿಯಾಗಿ ಬಾರದೆ ಪ್ರಕ್ರಿಯೆ ಸ್ಥಗಿತಗೊಳ್ಳುತ್ತಿದೆ. ಪ್ರತಿಯೊಂದು ಮನೆಯ ಸಮೀಕ್ಷೆಗೆ 60 ಪ್ರಶ್ನೆಗಳನ್ನು ಕಡ್ಡಾಯಗೊಳಿಸಿರುವುದು ಸಮೀಕ್ಷೆದಾರರ ಮೇಲೆ ಅತಿಯಾದ ಹೊರೆಯಾಗಿದೆ. ಇದರಿಂದ ಮಾಹಿತಿದಾರರಿಗೂ ಬೇಸರ ಉಂಟಾಗಿದೆ. ಒಂಟಿ ಮಹಿಳಾ ಸಿಬ್ಬಂದಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ವೇಳೆ ಸುರಕ್ಷತೆ ಹಾಗೂ ಸಾಮಾಜಿಕ ಮುಜುಗರದ ಸಮಸ್ಯೆಗಳು ಎದುರಾಗುತ್ತಿವೆ. ಕೂಡಲೇ ಪರಿಹರಿಸ ಬೇಕು ಎಂದು ಒತ್ತಾಯಿಸಿದ್ದಾರೆ.
