ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಸರ್ಕಾರಕ್ಕೆ ಸಂಖ್ಯಾ ಬಲವಿದ್ದರು ಕಾಂಗ್ರೆಸ್ ಮೇಲೆ ಜನರಿಗೆ ವಿಶ್ವಾಸವಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಪ್ರಸ್ತುತ ಸರ್ಕಾರಕ್ಕೆ ಸಂಖ್ಯಾ ಬಲ ಇದೆ. ಆದರೆ, ಅದು ಜನರ ವಿಶ್ವಾಸ ಕಳೆದುಕೊಂಡಿದೆ ಎಂದಿದ್ದಾರೆ. ಇವತ್ತು ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಇದನ್ನು ಒಂದು ಸವಾಲಾಗಿ ಸ್ವೀಕರಿಸಿ, ತಮ್ಮ ಸರ್ಕಾರದ ಜನಪ್ರಿಯತೆಯನ್ನು ಪರೀಕ್ಷಿಸಲು ಸರ್ಕಾರವನ್ನು ವಿಸರ್ಜಿಸಿ ಚುನಾವಣೆ ಎದುರಿಸಲಿ ಎಂದು ನೇರ ಸವಾಲು ಹಾಕಿದ್ದಾರೆ.
ಚುನಾವಣೆ ನಡೆದರೆ ಅವರ ಭವಿಷ್ಯ ಏನು ಎಂಬುದು ಗೊತ್ತಾಗುತ್ತದೆ. ಆದರೆ, ಆ ಧೈರ್ಯ ಸರ್ಕಾರಕ್ಕೆ ಇಲ್ಲ ಮತ್ತು ಅವರು ಚುನಾವಣೆಯನ್ನು ಎದುರಿಸುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ಗೆ ಸಂಖ್ಯಾ ಬಲವಿದ್ದರೂ, ಪಕ್ಷದೊಳಗೆ ಭಿನ್ನಮತಿಯ ಚಟುವಟಿಕೆಗಳು ನಡೆಯುತ್ತಿವೆ. ನವೆಂಬರ್ ಕ್ರಾಂತಿಯ ಬಗ್ಗೆ ಮಾತನಾಡಿದವರು ಯಾರು. ಕಾಂಗ್ರೆಸ್ಸಿನವರೇ ಅಲ್ಲವೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ನಾವು ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಆದರೆ ನಾವು ಈ ಸರ್ಕಾರವನ್ನು ಬೀಳಿಸಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
