ಚಿಕ್ಕಮಗಳೂರು: ದೇಶದಲ್ಲಿ ನಡೆಯುತ್ತಿರುವ ಮತಕಳ್ಳತನ ಪ್ರಕರಣ ತಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸಹಿ ಸಂಗ್ರಹ ಅಭಿಯಾನ ನಡೆಸಿದರು.
ಇಂದು ಬೆಳಗ್ಗೆ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಏರ್ಪಡಿಸಲಾಗಿದ್ದ ಸಹಿ ಸಂಗ್ರಹ ಅಭಿಯಾನದ ಅಂಗವಾಗಿ ನಗರದ ಆಜಾದ್ ಪಾರ್ಕ್ನಲ್ಲಿ ಸಮಾವೇಶಗೊಂಡ ಹಲವಾರು ಮುಖಂಡರು, ಕಾರ್ಯಕರ್ತರು ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದರು. ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಈಗಿನ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅಧಿಕಾರ ದುರ್ಬಕೆ ಮಾಡಿಕೊಂಡಷ್ಟು ಯಾವ ಸರಕಾರಗಳು ಮಾಡಿಕೊಂಡಿಲ್ಲ ಎಂದು ಆರೋಪಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿಬಿಐ, ಇಡಿ ಮತ್ತಿತರೆ ಅನೇಕ ಸ್ವಾಯತ್ತ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ನ್ಯಾಯಾಂಗ ವ್ಯವಸ್ಥೆಯನ್ನೂ ಹದಗೆಡಿಸಿದೆ. ಈಗ ಮತಕಳ್ಳತನಕ್ಕೂ ಇಳಿದುಬಿಟ್ಟಿದೆ. ಇದನ್ನು ಕಾಂಗ್ರೆಸ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ಸಾಬೀತುಪಡಿಸಿದ್ದಾರೆ. ಕಾಂಗ್ರೆಸ್ ಮತದಾರರನ್ನು ಡಿಲೀಟ್ ಮಾಡುವುದು, ಸತ್ತವರನ್ನು ಬದುಕಿಸುವುದು, ಬದುಕಿರುವವರನ್ನು ಸಾಯಿಸುವ ಕೆಲಸವನ್ನು ಮಾಡಿದ್ದಾರೆ. ಈ ಬಗ್ಗೆ ಮತದಾರರು ಜಾಗೃತರಾಗಬೇಕು ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ಎಂ.ಎಲ್.ಮೂರ್ತಿ ಮಾತನಾಡಿ, ಮತಕಳ್ಳತನದ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ನಿನ್ನೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆಯುವ ಪ್ರಯತ್ನ, ಕೇರಳದಲ್ಲಿ ರಾಹುಲ್ಗಾಂಧಿಗೆ ಬೆದರಿಕೆ, ಹೀಗೆ ದಿನನಿತ್ಯ ದೇಶದಲ್ಲಿ ಭಯದ ವಾತಾವರಣವನ್ನು ಕಾಣುತ್ತಿದ್ದೇವೆ. ಮತಕಳವು ತಡೆಯಬೇಕಾದರೆ ಚುನಾವಣಾ ಆಯೋಗದ ಮುಖ್ಯಸ್ಥ ಯಾವುದೇ ಪಕ್ಷದ ಚಮಚಾ ಆಗಿರಬಾರದು ಎಂದು ಹೇಳಿದರು.
ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿಶಾಂತೇಗೌಡ ಮಾತನಾಡಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಸಿಡಿಎ ಅಧ್ಯಕ್ಷ ನಯಾಜ್ ಅಹ್ಮದ್, ಮಲ್ಲೇಶಸ್ವಾಮಿ, ಪ್ರವೀಣ್, ಹಿರೇಮಗಳೂರು ರಾಮಚಂದ್ರ, ಮತ್ತಿತರರಿದ್ದರು.
