ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ನಡೆದಿದೆ.
ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕಾರ್ಮಿಕನನ್ನು ದಾಖಲಿಸಲಾಗಿದೆ. ಅರಣ್ಯ ಇಲಾಖೆ ಮತ್ತು ಕ್ಷೇತ್ರದ ಶಾಸಕರ ನಿರ್ಲಕ್ಷ್ಯದಿಂದಾಗಿ ಕಾಡಾನೆ ದಾಳಿ ಮತ್ತೊಮ್ಮೆ ಸಂಭವಿಸಿದೆ ಎಂದು ಅಲ್ಲಿನ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕಾಡಾನೆ ದಾಳಿಗೆ ಹಲವು ಜೀವ ಹಾನಿಯಾಗಿದೆ. ಬಾಳೆಹೊನ್ನೂರು, ನರಸಿಂಹರಾಜಪುರ, ಖಾಂಡ್ಯ, ಕೊಪ್ಪ, ಮೂಡಿಗೆರೆ ಭಾಗದ ಜನರು ಕಾಡಾನೆ ಹಾವಳಿಯಿಂದ ತತ್ತರಿಸಿ ಹೋಗಿದ್ದು, ಜೀವಭಯದಿಂದ ಕೃಷಿ ತೋಟಗಳಿಗೆ ಹೋಗುವ ಪರಿಸ್ಥಿತಿ ಉದ್ಭವಿಸಿದೆ. ಜಿಲ್ಲೆಯ ಅಲ್ಲಲ್ಲಿ ಭಾರಿ ಪ್ರಮಾಣದಲ್ಲಿ ಕಾಡಾನೆ ಹಾವಳಿ ಇದ್ದರೂ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ ಎಂಬುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗುತ್ತಿದೆ.
