ಚಿಕ್ಕಮಗಳೂರು: ಮೆಸ್ಕಾಂ ನಿರ್ಲಕ್ಷ್ಯಕ್ಕೆ ನಾಲ್ಕು ಮೂಕ ಪ್ರಾಣಿಗಳು ಬಲಿಯಾಗಿರುವ ಘಟನೆಯೊಂದು ಚಿಕ್ಕಮಗಳೂರು ಸಮೀಪದ ಇಂದಾವರ ಗ್ರಾಮದಲ್ಲಿ ನಡೆದಿದೆ.
ಹೌದು .. ಹಳೆಯ ಕಬ್ಬಿಣದ ವಿದ್ಯುತ್ ಕಂಬದ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ, ಮೇಯಲು ತೆರಳಿದ್ದ ನಾಲ್ಕು ಹಸುಗಳು ಸ್ಥಳದಲ್ಲೇ ಸಾವನ್ನಪ್ಪಿವೆ.ಗ್ರಾಮದ ರೈತ ಚೆನ್ನಪ್ಪ ಎಂಬುವರಿಗೆ ಸೇರಿದ ಈ ಹಸುಗಳು ಎಂದಿನಂತೆ ಮೇವು ಅರಸಿ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಕಷ್ಟಪಟ್ಟು ಸಾಕಿದ ಹಸುಗಳು ಪ್ರಾಣಬಿಟ್ಟಿರುವುದನ್ನು ಕಂಡ ರೈತ ಚನ್ನಪ್ಪ ಕಂಗಾಲಾಗಿದ್ದು, ತಮ್ಮ ಜೀವನೋಪಾಯಕ್ಕೆ ಆಸರೆಯಾಗಿದ್ದ ಜಾನುವಾರುಗಳನ್ನು ಕಳೆದುಕೊಂಡು ಕಣ್ಣೀರು ಹಾಕಿದ್ದಾರೆ.

ಈ ಘಟನೆಯ ಬೆನ್ನಲ್ಲೇ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು ಹಳೆಯ ಕಬ್ಬಿಣದ ವಿದ್ಯುತ್ ಕಂಬಗಳನ್ನು ಬದಲಾಯಿಸಬೇಕೆಂಬ ನಿಯಮಗಳಿದ್ದರೂ, ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಈ ಸಾವುಗಳು ಸಂಭವಿಸಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನಾಲ್ಕು ಜಾನುವಾರುಗಳನ್ನು ಕಳೆದುಕೊಂಡ ರೈತನಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ
