ಚಿಕ್ಕಮಗಳೂರು: ಸತತ ಮಳೆಯಿಂದಾಗಿ ರಸ್ತೆಗಳ ಹಾನಿ ಮತ್ತು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ನಗರದ ವಿವಿಧ ಬಡಾವಣೆಗಳಿಗೆ ಶಾಸಕ ಹೆಚ್.ಡಿ.ತಮ್ಮಯ್ಯ ಭೇಟಿ ನೀಡಿದರು.
ಮಳೆಯಿಂದಾಗಿ ಹದಗೆಟ್ಟಿರುವ ನಗರದ ರಸ್ತೆಗಳ ಅಭಿವೃದ್ಧಿಗೆ 27.5 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ಒದಗಿಸಲಾಗಿದ್ದು, ಮಳೆ ನಿಂತ ಕೂಡಲೇ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.
ನಗರದ ಇಂಡಿಯನ್ ಐಸ್ಕ್ರೀಂ ಪಾರ್ಲರ್, ಮಲ್ಲಂದೂರು ರಸ್ತೆ, ವಿಜಯಪುರ ಹಾಗೂ ಹನುಮಂತಪ್ಪ ವೃತ್ತದಲ್ಲಿ ಇಂದು ಬೆಳಿಗ್ಗೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ಹಾಗೂ ಈ ವರ್ಷ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ರಸ್ತೆಗಳು ಹೆಚ್ಚಾಗಿ ಗುಂಡಿ ಬಿದ್ದಿವೆ. ಜೊತೆಗೆ ಯು.ಜಿ.ಡಿ. ಹಾಗೂ ಅಮೃತ್ ಯೋಜನೆಯ ಕಾಮಗಾರಿಗಳಿಂದ ಕೂಡ ರಸ್ತೆಗಳು ಹಾನಿಗೊಳಗಾಗಿವೆ ಎಂಬ ದೂರುಗಳೂ ಕೇಳಿ ಬಂದಿವೆ ಎಂದರು.
ಸತತ ಮಳೆಯಿಂದಾಗಿ ರಸ್ತೆಗಳ ಹಾನಿ ಮತ್ತು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ ಅವರು, ಇದೇ ರೀತಿ ಪ್ರತೀ ತಿಂಗಳಿಗೊಮ್ಮೆ ಬಡಾವಣೆಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
