ಚಿಕ್ಕಮಗಳೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ ಅವರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ನ.13 ರಂದು ನಗರದಲ್ಲಿ ಏಕತಾ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬೆಳಿಗ್ಗೆ 7.30ಕ್ಕೆ ಶ್ರೀಕಂಠಪ್ಪ ವೃತ್ತದಿಂದ ಹೊರಟು ಬಸವನಹಳ್ಳಿ ರಸ್ತೆ, ಎಂ.ಜಿ.ರಸ್ತೆ, ಆಜಾದ್ ಪಾರ್ಕ್ ಮೂಲಕ ಹೊಸಮನೆ ಬಡಾವಣೆ ತನಕ ಪಾದಯಾತ್ರೆ ನಡೆಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವಿದ್ಯಾರ್ಥಿಗಳು, ನಾಗರಿಕರು, ಸಂಘ-ಸಂಸ್ಥೆಗಳ ಮುಖಂಡರು ಏಕತಾ ನಡಿಗೆಯಲ್ಲಿ ಭಾಗವಹಿಸುವರು. ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ನ.20 ರಂದು ಮೂಡಿಗೆರೆ ಪಟ್ಟಣದಲ್ಲಿ ಬೆಳಿಗ್ಗೆ 7.30ಕ್ಕೆ ಏಕತಾ ನಡಿಗೆ ಏರ್ಪಡಿಸಲಾಗಿದೆ. ಶಾಲಾ–ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
