ಚಿಕ್ಕಮಗಳೂರು :ಸಮಾಜ ಸೇವಕಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಮೋಹಿನಿ ಸಿದ್ದೇಗೌಡ ಇಂದು ಮುಂಜಾನೆ ನಿಧನರಾಗಿದ್ದಾರೆ.
ಪಾರ್ಥಿವ ಶರೀರವನ್ನು ಚಿಕ್ಕಮಗಳೂರಿನ ಸ್ವಗೃಹದಲ್ಲಿ (near CDA office, Kalyan nagar) 12 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ನಂತರ ಮೂಡಿಗೆರೆಯ ಮುದ್ರೆಮನೆ ಕಾಫಿ ಕ್ಯೂರಿಂಗ್ ವರ್ಕ್ಸ್ ಮೂಡಿಗೆರೆಯಲ್ಲಿ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 5 ರಿಂದ 6.30 ರ ಒಳಗೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕಸ್ತೂರಬಾ ಸದನ, ಕೌಟುಂಬಿಕ ಸಲಹಾ ಕೇಂದ್ರ ಮತ್ತು ಮಹಿಳಾ ಸಾಂತ್ವನ ಕೇಂದ್ರದಲ್ಲಿ ತಮ್ಮ ಬದುಕಿನ ಬಹು ಭಾಗವನ್ನು ಕಳೆದ ಇವರು ಮಹಿಳಾ ಜಾಗೃತಿ ಸಂಘ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ದುಡಿದವರು.
ಸಹಕಾರ ಕ್ಷೇತ್ರದಲ್ಲೂ ತಮ್ಮ ಚಾಪು ಮೂಡಿಸಿದ ಮೋಹಿನಿ ಸಿದ್ದೇಗೌಡ ನೊಂದ ಮಹಿಳೆಯರ ಧ್ವನಿಯಾಗಿ ಇದ್ದವರು. ತಮ್ಮ ಇಳಿವಯಸ್ಸಿನಲ್ಲಿಯೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ತಮ್ಮ ಸಮಾಜಮುಖಿ ಕಾರ್ಯಗಳಿಂದಲೇ ಚಿಕ್ಕಮಗಳೂರಿನ ಜನರ ಪ್ರೀತಿಗೆ ಪಾತ್ರರಾಗಿದ್ದ ಸಮಾಜ ಸೇವಕಿ, ಪಕ್ಷ ಸಂಘಟನೆಯಲ್ಲಿ ಅದಮ್ಯ ಸೇವೆ ಸಲ್ಲಿಸಿದ ಹಿರಿಯ ನಾಯಕರು,ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹೆಚ್. ಎಂ. ಮೋಹಿನಿ ಸಿದ್ದೇಗೌಡರು ದೈವಾಧೀನರಾದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ದುಃಖವಾಯಿತು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸಂತಾಪ ಸೂಚಿಸಿದರು.
ಸಾಮಾಜಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಚಿಕ್ಕಮಗಳೂರಿನಲ್ಲಿ ಸದಾ ಅಶಕ್ತರ ಪಾಲಿಗೆ ಆಸರೆಯಾದ ಮೋಹಿನಿ ಸಿದ್ದೇಗೌಡರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ.
ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ಒದಗಿಸಲಿ. ಅವರ ಕುಟುಂಬ ವರ್ಗ ಹಾಗೂ ಹಿತೈಷಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
