ಚಿಕ್ಕಮಗಳೂರು: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಸೆ. 24ರಿಂದ 26ರವರೆಗೆ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಸಾರ್ವಜನಿಕರು ಸೆ. 24ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರ ತನಕ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆ ತನಕ ನಗರದ ಕುವೆಂಪು ಕಲಾ ಮಂದಿರದಲ್ಲಿ ಸಾರ್ವಜನಿಕರ ಕುಂದು–ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಯಲಿದೆ.
ಜಿಲ್ಲೆಯ ಸರ್ಕಾರಿ ಅಧಿಕಾರಿ, ನೌಕರರಿಂದ ಕೆಲಸದಲ್ಲಿ ವಿಳಂಬವಾಗಿದ್ದರೆ, ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಿಗೆ ತೊಂದರೆ ಕೊಡುವುದು, ದುರಾಡಳಿತದಲ್ಲಿ ತೊಡಗಿದ್ದರೆ ಅಹವಾಲುಗಳನ್ನು ಅರ್ಜಿ ನಮೂನೆ-1 ಮತ್ತು ನಮೂನೆ-2ರಲ್ಲಿ ಲಿಖಿತ ರೂಪದಲ್ಲಿ ದಾಖಲೆ ಮತ್ತು ಸಾಕ್ಷ್ಯಗಳೊಂದಿಗೆ ಸಲ್ಲಿಸಬಹುದು.
ಸೆ. 25ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರ ತನಕ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ಜಿ.ಪಂ. ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿಸಿದರು.
