ಚಿಕ್ಕಮಗಳೂರು: ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ ಮಾಡಿರುವ ಘಟನೆ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ.

ಗಣೇಶ್ ಗೌಡ (38) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಕೊಲೆಗೂ ಮುನ್ನ ಶುಕ್ರವಾರ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಕೊಚ್ಚಿ ಗಣೇಶ್ ನನ್ನು ಹತ್ಯೆ ಮಾಡಲಾಗಿದೆ.
ಎದುರಾಳಿ ಗುಂಪಿನ ಇಬ್ಬರ ತಲೆಗೂ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
