ಚಿಕ್ಕಮಗಳೂರು: ಮುತ್ತೋಡಿ ವಲಯಕ್ಕೆ ಹೊಂದಿಕೊಂಡಿರುವ ವೆಂಕಟೇಶ್ ಎಂಬುವರ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯೊಂದರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪ್ರಾಥಮಿಕ ಮಾಹಿತಿಯಂತೆ, ಹುಲಿಯು ಸುಮಾರು ಒಂದು ದಿನದ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಮೃತದೇಹ ಪತ್ತೆಯಾಗುತ್ತಿದ್ದಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಹಿರಿಯ ಅಧಿಕಾರಿಗಳೂ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಮಾರ್ಗಸೂಚಿಗಳ ಪ್ರಕಾರ ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗಲಿದ್ದು, ಹುಲಿಯ ಸಾವಿಗೆ ನಿಖರ ಕಾರಣ ಪರೀಕ್ಷಾ ವರದಿಯ ಬಳಿಕವೇ ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹುಲಿಯ ಸಾವಿನ ಕುರಿತು ಸಮಗ್ರ ತನಿಖೆ ನಡೆಸಿ, ಅದು ಸಹಜ ಸಾವೇ ಅಥವಾ ಬೇರೆ ಯಾವುದೇ ಕಾರಣದಿಂದ ಸಂಭವಿಸಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಆಗ್ರಹಿಸಿದ್ದಾರೆ.
