ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ರಸ್ತೆಗಳಲ್ಲಿಯೂ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ವಾಹನ ಹಾಗೂ ಜನ ಸಂಚಾರ ಸಾಧ್ಯವಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆಗುಂಡಿ ಮುಚ್ಚುವಂತೆ ಒತ್ತಾಯಿಸಿ ಇಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಿದ್ದಾರೆ.
ಆಲ್ದೂರ್ ಹೋಬಳಿಯ ಜೋಳದಾಳು ಸರ್ಕಲ್ ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಿದ್ದು ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ರಸ್ತೆ ತಡೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಬಳಿಕ ಮೂಡಿಗೆರೆ ಕ್ಷೇತ್ರದ ಎಲ್ಲ ತಾಲೂಕು ಹಾಗೂ ಹೋಬಳಿ ಕೇಂದ್ರದಲ್ಲಿಯೂ ಹೋರಾಟ ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು
ಚಿಕ್ಕಮಗಳೂರು-ಮಲ್ಲಂದೂರು ರಸ್ತೆ, ವಸ್ತಾರೆ -ಆಲ್ದೂರು- ಬಾಳೆಹೊನ್ನೂರು ರಸ್ತೆ, ಹಾಂದಿ- ಬಸ್ಕಲ್- ಗೆಂಡೆಹಳ್ಳಿ ರಸ್ತೆ ಸೇರಿದಂತೆ ಪ್ರತಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಗುಂಡಿಗಳು ಬಾಯಿ ತೆರೆದು ನಿಂತಿದ್ದು, ಮೃತ್ಯುವಿಗೆ ಅಹ್ವಾನ ನೀಡುವಂತಿವೆ. ಕಳೆದ ಎರಡು ವರ್ಷದಿಂದ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿಲ್ಲ. ಈಗ ಪ್ರಶ್ನೆ ಮಾಡಿದರೆ ಮಳೆಗಾಲ ಎನ್ನುತ್ತಿದ್ದಾರೆ. ಆದರೆ ಬೇಸಿಗೆಯಲ್ಲಿ ರಸ್ತೆ ಗುಂಡಿ ಮುಚ್ಚಬೇಕು ಎಂಬ ಅರಿವು ಶಾಸಕರಿಗಿರಲಿಲ್ಲವೇ? ಎಂದು ಕಿಡಿಕಾರಿದ್ದಾರೆ.
