ಸಕಲೇಶಪುರ: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಮಲೆನಾಡು ಭಾಗದ ಸರ್ಕಾರಿ ಶಾಲೆಗಳ ಶಿಥಿಲಗೊಂಡ ಕಟ್ಟಡಗಳ ದುರಸ್ತಿ ಹಾಗೂ ಹೊಸ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರ ತುರ್ತು ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು.
ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನೂತನ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಶಾಲೆಗೆ ಹೊಸ ಕಟ್ಟಡ ನಿರ್ಮಿಸಬೇಕೆಂಬ ನಿರ್ಧಾರವನ್ನು ಈಗಾಗಲೇ ಕೈಗೊಂಡಿದ್ದು, ಅದರಂತೆ ಸುಮಾರು ₹14.50 ಲಕ್ಷ ಅನುದಾನ ಮಂಜೂರು ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಇಲ್ಲಿನ ಹಳೆಯ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದರಿಂದ ಹೊಸ ಕಟ್ಟಡದ ಅವಶ್ಯಕತೆ ಹೆಚ್ಚಾಗಿದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಶಿಕ್ಷಣದ ವಾತಾವರಣ ಕಲ್ಪಿಸುವ ಉದ್ದೇಶದಿಂದ ಅಭಿವೃದ್ಧಿ ಕಾರ್ಯ ಆರಂಭಿಸಲಾಗಿದೆ ಎಂದರು.
ಪ್ರಸ್ತುತ ಶಾಲೆಗೆ ಒಂಬತ್ತು ಕೊಠಡಿಗಳ ಅಗತ್ಯವಿದ್ದು, ಹಂತ ಹಂತವಾಗಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು. ಮಲೆನಾಡು ಪ್ರದೇಶದಲ್ಲಿ ಅಧಿಕ ಮಳೆಯ ಕಾರಣ ಶಾಲಾ ಕಟ್ಟಡಗಳ ನಿರ್ವಹಣೆ ಮತ್ತು ಬಲಿಷ್ಠ ಕಟ್ಟಡ ನಿರ್ಮಾಣಕ್ಕೆ ವಿಶೇಷ ಗಮನ ಹರಿಸಬೇಕಿದೆ ಎಂದು ಹೇಳಿದರು.
ಈ ಕುರಿತು ಸರ್ಕಾರದ ಮಟ್ಟದಲ್ಲಿಯೂ ಮನವಿ ಮಾಡಲಾಗಿದ್ದು, ಮಲೆನಾಡು ಭಾಗದ ಅನೇಕ ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಅವುಗಳ ದುರಸ್ತಿ ಹಾಗೂ ಹೊಸ ಕಟ್ಟಡ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ಮಕ್ಕಳು ಯಾವುದೇ ಭಯವಿಲ್ಲದೆ ಸುರಕ್ಷಿತ ವಾತಾವರಣದಲ್ಲಿ ಶಿಕ್ಷಣ ಪಡೆಯಲು ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರದ ಇನ್ನಷ್ಟು ಶಾಲೆಗಳಿಗೆ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಇದೆ ವೇಳೆ ಶಾಲೆಯ ಆವರಣದೊಳಗೆ ನೂತನವಾಗಿ ನಿರ್ಮಾಣಗೊಂಡ ಶೌಚಾಲಯವನ್ನು ಶಾಸಕರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಶಿಕ್ಷಣಾಧಿಕಾರಿ ಪುಷ್ಪ, ತಾಲೂಕು ಬಿಜೆಪಿ ಉಪಾಧ್ಯಕ್ಷ ಜೈಪ್ರಕಾಶ್, ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ಧರ್ಮಪ್ಪ, ದೈಹಿಕ ಶಿಕ್ಷಣ ಪರೀಕ್ಷಕರದ ಯಶವಂತ್,ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಶೆಟ್ಟಿ,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾ ಜಗದೀಶ್, ಮುಖಂಡರಾದ ಬಸವರಾಜ್, ಪುನೀತಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು
