ಹಾಸನ: ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿ ತೆರಳುತ್ತಿದ್ದ ದಂಪತಿ ಮೃತಪಟ್ಟ ಘಟನೆ ಹೊಳೆನರಸೀಪುರ ತಾಲೂಕಿನ ಮೈಸೂರು ರಸ್ತೆಯ ಪೆದ್ದನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಹೌದು .. ಹೊಳೆನರಸೀಪುರ ತಾಲೂಕಿನ ನಗರ್ತಿ ಗ್ರಾಮದ ರಮೇಶ್ (42) ಹಾಗೂ ಅವರ ಪತ್ನಿ ಮಂಜಮ್ಮ (38) ಮೃತ ದಂಪತಿ. ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಹನ ಚಾಲಕನ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಡಿಕ್ಕಿ ಹೊಡೆದ ಬಳಿಕ ಗೂಡ್ಸ್ ವಾಹನವು ಸ್ಕೂಟಿಯನ್ನು ಸುಮಾರು 100 ಮೀಟರ್ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿ ಜೋಳದ ಗದ್ದೆಗೆ ನುಗ್ಗಿದೆ. ಬಳಿಕ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.
ಡಿಕ್ಕಿಯ ತೀವ್ರತೆಗೆ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಂಜಮ್ಮ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.
ಪ್ರಕರಣ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಾಪತ್ತೆಯಾದ ಗೂಡ್ಸ್ ಚಾಲಕನ ಶೋಧಕ್ಕೆ ಪೊಲೀಸರು ಇಳಿದಿದ್ದಾರೆ.
