ಚಿಕ್ಕಮಗಳೂರು: : ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರು ಮತ್ತು ಸ್ಥಳೀಯ ಜನತೆಯ ಹಿತದೃಷ್ಟಿಯಿಂದ ಗಿರಿ ಪ್ರದೇಶದ ಕೆಲವು ಪ್ರವಾಸೋದ್ಯಮ ಸ್ಥಳಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರವಾಸೋದ್ಯಮ ನೀತಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಿರಿ ಪ್ರದೇಶದ ಕೆಲವು ಭಾಗಗಳಲ್ಲಿ ಗುಡ್ಡ ಕುಸಿತದಿಂದ ಅಲ್ಲಲ್ಲಿ ಮಣ್ಣು ಆವರಿಸಿದ್ದು, ರಸ್ತೆ ಕುಸಿತ ಹಿನ್ನೆಲೆಯಲ್ಲಿ ನಿರ್ಬಂಧ ಮಾಡಲಾಗಿದೆ.
ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತದ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದ ಅವರು, ಪ್ರವಾಸಿಗರು ಬರುವ ವಾಹನಗಳಿಗೆ ಸ್ಥಳೀಯವಾಗಿ ಗುರುತಿಸಿರುವ ಸ್ಥಳಗಳಲ್ಲಿ ತಮ್ಮ ವಾಹನಗಳನ್ನು ನಿಲುಗಡೆಗೊಳಿಸಿ ಸ್ಥಳೀಯ ಲಘು ವಾಹನಗಳಲ್ಲಿ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ತೆರಳಬಹುದು. ಪ್ರವಾಸಿಗರನ್ನು ಕರೆದೊಯ್ಯಲು ಬೆಳಿಗ್ಗೆ ೧೦೦ ಹಾಗೂ ಸಂಜೆ ೧೦೦ ವಾಹನಗಳನ್ನು ಮಾತ್ರ ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಆತಿಥ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಅನುವಾಗುವಂತೆ ಆಹಾರ ಮತ್ತು ಪಾನೀಯ ವಿತರಣೆ, ಕೊಠಡಿ ನಿರ್ವಹಣೆ, ಸ್ವಾಗತಗಾರಿಕೆ ಹಾಗೂ ವಿವಿಧ ಆಹಾರ ತಯಾರಿಕೆಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಡಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಕನಿಷ್ಠ 20 ರಿಂದ 45 ವರ್ಷ ವಯೋಮಿತಿಯವರಿಗೆ ಈ ತರಬೇತಿ ನೀಡಲಾಗುತ್ತಿದ್ದು, ಉಚಿತ ಊಟ, ವಸತಿ ಹಾಗೂ ಪ್ರೋತ್ಸಾಹಧನವನ್ನು ನೀಡಲಾಗುವುದು. ಜಿಲ್ಲೆಯ ಅಭ್ಯರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.