ಹಾಸನ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಡ್ಡ ಕುಸಿತಗೊಂಡಿದ್ದು, ಆತಂಕ ಎದುರಾಗಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಕ್ಕೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ಗುಡ್ಡ ಕುಸಿತ ಉಂಟಾಗಿದೆ. ಸಕಲೇಶಪುರದಿಂದ ಮಂಗಳೂರು ಕಡೆ ತೆರಳುವ ಮಾರ್ಗದಲ್ಲಿ ಘಟನೆ ನಡೆದಿದ್ದು, ತಕ್ಷಣ ಜೆಸಿಬಿ ಬಳಸಿ ಸಿಬ್ಬಂದಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ. ಈ ಬಾರಿ ಗುಡ್ಡ ಕುಸಿದರೂ ಸಂಚಾರಕ್ಕೆ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ.
ಗುಡ್ಡದ ಮಣ್ಣು ಕುಸಿಯುವುದನ್ನು ತಡೆಗಟ್ಟಲು ನಿರ್ಮಿಸಿರುವ ತಡೆಗೋಡೆ ಅವೈಜ್ಞಾನಿಕವಾಗಿ ಕೂಡಿದೆ. ಪರಿಣಾಮ ಮಳೆ ಅಬ್ಬರಕ್ಕೆ ಅಲ್ಲಲ್ಲಿ ಗುಡ್ಡದ ಮಣ್ಣು ಕುಸಿಯುತ್ತಲೇ ಇದೆ. ಮಳೆಯೂ ಹೆಚ್ಚಿರುವ ಕಾರಣ ಕೆಸರುಮಣ್ಣು ರಸ್ತೆಗೆ ಜಾರಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಿರಂತರವಾಗಿ ನಡೆದಿದೆ.
ಕಳೆದ ಮೂರು, ನಾಲ್ಕು ವರ್ಷಗಳಿಂದ ಗುಡ್ಡ ಕುಸಿಯುತ್ತಲೇ ಇದೆ. ಆದರೆ ಅಧಿಕಾರಿ ವರ್ಗದವರಾಗಲಿ, ಗುತ್ತಿಗೆದಾರರಾಗಲಿ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಆದರೆ ಇದರಿಂದ ತೊಂದರೆ ಅನುಭವಿಸುತ್ತಿರುವುದು ಸಾರ್ವಜನಿಕರು ಮತ್ತು ಪ್ರಯಾಣಿಕ ವರ್ಗದವರು ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
