ಚಿಕ್ಕಮಗಳೂರು : ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಎಲ್ಲ್ಲ ಜಿಲ್ಲೆಗಳಿಗೂ ಹೊಸ ಬಸ್ಗಳನ್ನು ಒದಗಿಸುವುದಲ್ಲದೆ, ಚಿಕ್ಕಮಗಳೂರು-ಮೈಸೂರು ನಡುವೆ ಎರಡು ವೋಲ್ವೊ ಬಸ್ಗಳ ವ್ಯವಸ್ಥೆ ಕಲ್ಪಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಗರದ ಗ್ರಾಮಾಂತರ ಬಸ್ ನಿಲ್ದಾಣದ ಆವರಣದಲ್ಲಿ ನೂತನ ಹೈಟೆಕ್ ಬಸ್ ನಿಲ್ದಾಣ ಶಂಕುಸ್ಥಾಪನೆ ಹಾಗೂ ನೂತನ ವಸತಿ ಗೃಹಗಳನ್ನು ಉದ್ಘಾಟಿಸಿ ಮಾತನಾಡಿದರು
ಮೈಸೂರು ಹಾಗೂ ಚಿಕ್ಕಮಗಳೂರು ನಡುವೆ ವೋಲ್ವೊ ಬಸ್ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಉಭಯ ಬಸ್ ನಿಲ್ದಾಣಗಳ ನಡುವೆ ಸ್ಕೈವಾಕ್ ನಿರ್ಮಿಸುವಂತೆ ಶಾಸಕ ಎಚ್.ಡಿ.ತಮ್ಮಯ್ಯ ಮುಂದಿಟ್ಟ ಬೇಡಿಕೆಗೆ ಸಚಿವರು ಸಮ್ಮತಿ ಸೂಚಿಸಿದರು.
ಇಲ್ಲಿನ ಒಂದೂವರೆ ಎಕರೆ ಪ್ರದೇಶದಲ್ಲಿ ಸುಮಾರು ೨೦ ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣವಾಗುತ್ತಿದೆ. 14 ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ನಿಲ್ದಾಣಕ್ಕೆ ಶಾಸಕರಾದ ಹೆಚ್.ಡಿ.ತಮ್ಮಯ್ಯ ಅವರು ಕಾರಣಕರ್ತರು ಎಂದರು.
ಈ ಬಾರಿಯ ಬಜೆಟ್ನಲ್ಲಿ 2 ಸಾವಿರ ಬಸ್ಗಳನ್ನು ನಿಗಮಕ್ಕೆ ಒದಗಿಸಲಾಗಿದ್ದು, ಅವುಗಳಲ್ಲಿ 900 ಬಸ್ಗಳನ್ನು ಕೆ.ಎಸ್.ಆರ್.ಟಿ.ಸಿ.ಗೆ ನೀಡಲಾಗುವುದು. ಇನ್ನು ಎರಡು-ಮೂರು ತಿಂಗಳಲ್ಲಿ ಈ ಬೇಡಿಕೆ ಈಡೇರಲಿದೆ ಎಂದರು.
ಎರಡೂವರೆ ವರ್ಷಗಳ ಅವಧಿಯಲ್ಲಿ ನಿಗಮಕ್ಕೆ ಸುಮಾರು 5800 ಬಸ್ಗಳನ್ನು ಖರೀದಿಸಲಾಗಿದೆ. ನಿಗಮಕ್ಕೆ ೯ ಸಾವಿರ ಸಿಬ್ಬಂದಿ ಭರ್ತಿ ಮಾಡಲಾಗಿದೆ. ಒಂದು ಸಾವಿರ ಜನರನ್ನು ಅನುಕಂಪದ ಆಧಾರದಲ್ಲಿ ನೇಮಕ ಮಾಡಲಾಗಿದೆ ಎಂದು ಹೇಳಿದರು.
ಸುಮಾರು 2.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ 12 ವಸತಿಗೃಹಗಳನ್ನು ಉದ್ಘಾಟಿಸಲಾಗಿದೆ 9.15 ಕೋಟಿ ರೂ. ವೆಚ್ಚದಲ್ಲಿ ತರೀಕೆರೆ ಬಸ್ ನಿಲ್ದಾಣ ಹಾಗೂ 6 ಕೋಟಿ ರೂ. ವೆಚ್ಚದಲ್ಲಿ ಕಡೂರು ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಹೇಳಿದರು. ಶೃಂಗೇರಿಯಲ್ಲಿ 8.82 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆರಂಭವಾಗಿದೆ. ಬೀರೂರಿನ ಬಸ್ ನಿಲ್ದಾಣವನ್ನು 2.5 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ತರೀಕೆರೆಯಲ್ಲಿ ಬಸ್ ಘಟಕ ನಿರ್ಮಾಣಕ್ಕೆ 9 ಕೋಟಿ ರೂ. ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
ಅಧ್ಯಕ್ಷತೆ ವಹಿಸಿದ್ದ ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ನಗರದಲ್ಲಿ ಗುಂಡಿ ಬಿದ್ದಿರುವ ರಸ್ತೆಗಳ ಅಭಿವೃದ್ಧಿ ಕೆಲಸ ಡಿಸೆಂಬರ್ ಒಂದರಿಂದ ಆರಂಭವಾಗಲಿದ್ದು, ಮಾರ್ಚ್ 31 ರೊಳಗೆ 22.5 ಕೋಟಿ ರೂ.ವೆಚ್ಚದಲ್ಲಿ ನಗರದ ಎಲ್ಲಾ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದರು.
ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿದರು. ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ ಪ್ರಾಸ್ತಾವಿಕ ಮಾತನಾಡಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕರ ಟಿ.ಡಿ.ರಾಜೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ನಯಾಜ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಕಾರ್ಯಕ್ರಮದಲ್ಲಿದ್ದರು.
