ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತ ಸಂಭವಿಸಿದ್ದು ಭದ್ರಾ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕೋಲಾರ ಜಿಲ್ಲೆಯಿಂದ ಪ್ರವಾಸಕ್ಕೆಂದು ಬಂದಿದ್ದ ಒಂಬತ್ತು ಮಂದಿ ಗೆಳೆಯರ ತಂಡದಲ್ಲಿ ಒಬ್ಬರಾಗಿದ್ದ ಸಂತೋಷ್(27) ಎಂಬ ಯುವಕ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ಭಾರಿ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ.

ಈ ಘಟನೆಯನ್ನು ಕಂಡು ಅವರ ಜೊತೆಯಲ್ಲಿದ್ದ ಸಹಯಾತ್ರಿಗಳು ತೀವ್ರ ಆತಂಕಗೊಂಡಿದ್ದು, ಕೂಡಲೇ ಸ್ಥಳೀಯರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆಯೇ ಕಳಸ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಈಜುಗಾರರ ನೆರವಿನೊಂದಿಗೆ ನದಿಯಲ್ಲಿ ಯುವಕನಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಸದ್ಯ ಕಾರ್ಯಾಚರಣೆ ಮುಂದುವರಿದಿದ್ದು, ಯುವಕನ ಪತ್ತೆಯಾದ ನಂತರವಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ನದಿಯ ಸೆಳೆತ ಹೆಚ್ಚಿರುವ ಕಾರಣ ಶೋಧ ಕಾರ್ಯಕ್ಕೆ ಅಲ್ಪ ಅಡ್ಡಿಯಾಗಿದ್ದರೂ, ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
