ಕೊಟ್ಟಿಗೆಹಾರ: ಪ್ರತಿಯೊಂದು ವಿದ್ಯಾಸಂಸ್ಥೆಯ ಕಾರ್ಯಚಟುವಟಿಕೆ ಅದರ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ ಎಂದು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎನ್. ರಾಜಗೋಪಾಲ್ ಹೇಳಿದರು.
ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ಚಿಕ್ಕಮಗಳೂರು ಜಿಲ್ಲಾ ಘಟಕ, ಮೂಡಿಗೆರೆ ತಾಲೂಕು ಘಟಕ ಹಾಗೂ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆ (ರಿ) ಬಣಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಬಣಕಲ್ನ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆ ಆವರಣದಲ್ಲಿ ಜಿಲ್ಲಾ ಶೈಕ್ಷಣಿಕ ಕಾರ್ಯಗಾರ ಮತ್ತು ಶಿಕ್ಷಕರಿಗೆ ಅಭಿನಂದನಾ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸೇವಾ ಅವಧಿಯಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಘಟಕಗಳನ್ನು ರಚಿಸಿ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಕಾರ್ಯವನ್ನು ಸಂಘ ನಿರಂತರವಾಗಿ ಮಾಡುತ್ತಿದೆ ಎಂದರು.
ಸಂಘದ ವತಿಯಿಂದ ಪ್ರತಿ ವರ್ಷ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಗಳನ್ನು ನೀಡಿ ಶಿಕ್ಷಕರ ಕಾರ್ಯಕ್ಷಮತೆಯನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದರು.
