ಬಣಕಲ್: ಮಳೆಗಾಲದ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಪ್ರವಾಹ, ಭೂಕುಸಿತ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬಣಕಲ್ ಪೊಲೀಸ್ ಠಾಣೆಯಲ್ಲಿ ವಿಪತ್ತು ನಿರ್ವಹಣಾ ಪೂರ್ವ ಸಿದ್ಧತಾ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿಎಸ್ಐ ದಿಲೀಪ್ ಕುಮಾರ್ ಮಾತನಾಡಿ, ವಿಪತ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಜಾಗರೂಕರಾಗಿರುವುದರ ಜೊತೆಗೆ ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ರಕ್ಷಣಾ ಕಾರ್ಯಾಚರಣೆಗಳು ಹಾಗೂ ಜನರ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಪ್ರವಾಹ ಮತ್ತು ಭೂಕುಸಿತದಂತಹ ಸಂದರ್ಭಗಳಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು, ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಡೆಸುವುದು ಹಾಗೂ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚೆ ನಡೆಯಿತು. ಅಲ್ಲದೆ ತುರ್ತು ಮಾಹಿತಿ ವಿನಿಮಯಕ್ಕಾಗಿ ವಿಶೇಷ ವಾಟ್ಸಾಪ್ ಗ್ರೂಪ್ ರಚಿಸಲಾಯಿತು.
ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಸಂಜಯ್, ಆರೀಫ್, ರವಿ, ಅಭಿ, ಅಜಿತ್, ವಿನಯ್, ವೆಂಕಟೇಶ್, ಪ್ರದೀಪ್, ಜಗದೀಶ್, ಸಂತೋಷ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
