ಚಿಕ್ಕಮಗಳೂರು: ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ವಿಯಷ ಹೊರಬಾರದಂತೆ ಶವವನ್ನು ಹೂತು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ನಡೆದಿದೆ.
ಹೌದು .. ಕರಿಯಪ್ಪ (55) ಮೃತಪಟ್ಟ ವ್ಯಕ್ತಿ. ದೊಣ್ಣೆಕೋರನಹಳ್ಳಿ ಗ್ರಾಮದ ಬಳಿ ಆರೋಪಿಗಳು ಕಾಡುಹಂದಿ ಬೇಟೆಯಾಡಲು ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ಈ ವೇಳೆ ಅಲ್ಲಿಗೆ ತೆರಳಿದ್ದ ಕರಿಯಪ್ಪ ಅವರು ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಈ ಘಟನೆಯಿಂದ ಗಾಬರಿಗೊಂಡ ಆರೋಪಿಗಳು ನುಣುಚಿಕೊಳ್ಳಲು ಯಾರಿಗೆ ವಿಷಯ ತಿಳಿಯದಂತೆ ಕರಿಯಪ್ಪ ಅವರ ಶವವನ್ನು ಗುಟ್ಟಾಗಿ ಹೂತುಹಾಕಿದ್ದರು.
ಕರಿಯಪ್ಪ ಅವರು ಮನೆಗೆ ವಾಪಸ್ ಬಾರದೇ ಇದ್ದಾಗ ಆತಂಕಗೊಂಡ ಕುಟುಂಬಸ್ಥರು ಮತ್ತು ಸಂಬಂಧಿಕರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಸುಳಿವು ಸಿಗದಿದ್ದಾಗ ಯಗಟಿ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು FIR ದಾಖಲಿಸಿದ್ದರು.
ಪ್ರಕರಣದ ಬೆನ್ನತ್ತಿದ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸುದೀರ್ಘವಾಗಿ ಪರಿಶೀಲಿಸಿದಾಗ ಅಸಲಿ ಸತ್ಯ ಹೊರಬಿದ್ದಿದೆ. ಪ್ರಕರಣದ ಗಂಭೀರತೆ ತಿಳಿದ ಗ್ರಾಮಸ್ಥರು ಯಗಟಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.
ವಿಷಯ ಹೊರಬಾರದಂತೆ ಶವವನ್ನು ಹೂತುಹಾಕಿದ್ದ ಮೂವರು ಆರೋಪಿಗಳಾದ ಚಂದ್ರಪ್ಪ, ಕೆಂಚಪ್ಪ ಮತ್ತು ಯದುಕುಮಾರ್ ಎಂಬುವವರನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ
