ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವನ್ಯಪ್ರಾಣಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮೂಡಿಗೆರೆ ತಾಲೂಕಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಸಿಸಿ ಟಿವಿ ಕ್ಯಾಮರದಲ್ಲಿ ಹುಲಿಯ ಚಲನವಲನ ಸೆರೆಯಾಗಿದ್ದು, ಜನರಲ್ಲಿ ಭಯ ಹುಟ್ಟಿಸಿದೆ.

ಮೂಡಿಗೆರೆ ತಾಲೂಕಿನ ಭಾರತೀಬೈಲು, ಬಿ.ಹೊಸಳ್ಳಿ ಗ್ರಾಮದಲ್ಲಿ ಹುಲಿಯ ಚಲನವಲನ ಕಾಣಿಸಿಕೊಂಡಿದ್ದು ಇಲ್ಲಿನ ಗ್ರಾಮಸ್ಥರಲ್ಲಿ ಭಯ ಸೃಷ್ಟಿಸಿದೆ. ಹುಲಿ ಹಸುಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಭಾರತೀಬೈಲು ಗ್ರಾಮ ಸಮೀಪದ ಅರಣ್ಯದಲ್ಲಿ ಸಿಸಿ ಟಿವಿ ಕ್ಯಾಮಾರ ಅಳವಡಿಸಲಾಗಿತ್ತು. ಸಿಸಿ ಟಿವಿಯಲ್ಲಿ ಹುಲಿಯ ಚಲನವಲನ ಸೆರೆಯಾಗಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ಕಾಫಿ, ಅಡಿಕೆ ಬೆಳೆಗಾರರು ಹೈರಾಣಾಗಿ ಹೋಗಿದ್ದಾರೆ, ಅನೇಕ ಮಂದಿ ರೈತರು, ಕಾರ್ಮಿಕರು ಕಾಡಾನೆಗಳ ದಾಳಿಯಿಂದಾಗಿ ಈಗಾಗಲೇ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಯೋಜನೆ ರೂಪಿಸಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ. ಈ ಬೇಡಿಕೆಗೆ ಸರಕಾರ ಇದುವರೆಗೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ, ಈ ನಡುವೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಹುಲಿ, ಚಿರತೆಗಳ ಹಾವಳಿ ಹೆಚ್ಚಾಗುತ್ತಿರುವುದು ರೈತರನ್ನು ನಿದ್ದೆ ಗೆಡುವಂತೆ ಮಾಡಿದೆ.
