ಕೊಟ್ಟಿಗೆಹಾರ: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಸಂಭವನೀಯ ಭೂಕುಸಿತ, ನೆರೆ ಹಾಗೂ ಇತರ ಪ್ರಕೃತಿ ವಿಕೋಪಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್, ಬಾಳೂರು ಮತ್ತು ಮಧುಗುಂಡಿ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಅರಣ್ಯ, ಕಂದಾಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಗಾಲದಲ್ಲಿ ಎದುರಾಗಬಹುದಾದ ಸವಾಲುಗಳು ಹಾಗೂ ಅವುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು. ಚಾರ್ಮಾಡಿ ಘಾಟ್ನ ಹೆದ್ದಾರಿ, ತಡೆಗೋಡೆಗಳು ಹಾಗೂ ಭೂಕುಸಿತ ಸಂಭವನೀಯ ಪ್ರದೇಶಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ನೆರೆ ಪ್ರವಾಹದ ಅಪಾಯ ಇರುವ ಬಾಳೂರು ಮತ್ತು ಮಧುಗುಂಡಿ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಮಳೆಗಾಲದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ನಟೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪವಲಯ ಅರಣ್ಯಾಧಿಕಾರಿ ರಂಜಿತ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚನ್ನಕೇಶವ, ಅಭಿಯಂತರರಾದ ಚನ್ನಯ್ಯ ಮತ್ತು ಮಂಜುನಾಥ್, ಹೆದ್ದಾರಿ ಪ್ರಾಧಿಕಾರದ ಅಭಿಯಂತರರಾದ ಶಶಿಕುಮಾರ್ ಹಾಗೂ ವಿಘ್ನೇಶ್, ವೃತ್ತ ನಿರೀಕ್ಷಕ ರಾಜಶೇಖರ್, ಕಂದಾಯ ಅಧಿಕಾರಿ ಮಂಜುನಾಥ್, ಬಾಬು, ಗ್ರಾಮ ಲೆಕ್ಕಾಧಿಕಾರಿ ಮಹೇಶ್ ಹಾಗೂ ಸಾಮಾಜಿಕ ಕಾರ್ಯಕರ್ತ ಸಂಜಯಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಿಲ್ಲಾಡಳಿತವು ಮುಂಗಾರು ಅವಧಿಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಅಪಾಯದ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
