ಮೂಡಿಗೆರೆ: ಶಾಸಕಿ ನಯನಾ ಮೋಟಮ್ಮ ಅವರ ವಯಕ್ತಿಕ ಜೀವನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟರ್ಗಳನ್ನು ಪ್ರಕಟಿಸಿರುವ ರಾಮನಗರದ ಯಕ್ಷಿತ್ರಾಜ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಸುಧೀರ್ ಚಕ್ರಮಣಿ ಒತ್ತಾಯಿಸಿದರು.
ಇಂದು ಹರೀಶ್ ಸಬ್ಬೆನಹಳ್ಳಿ ಹಾಗೂ ಸುಧೀರ್ ಚಕ್ರಮಣಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಯಾವುದೇ ಹುದ್ದೆಯಲ್ಲಿದ್ದರೂ ಪ್ರತಿಯೊಬ್ಬರಿಗೂ ವೈಯಕ್ತಿಕ ಜೀವನವಿರುತ್ತದೆ. ಶಾಸಕಿ ನಯನಾ ಮೋಟಮ್ಮ ಅವರೂ ರಾಜಕೀಯ ಹಾಗೂ ವೈಯಕ್ತಿಕ ಜೀವನವನ್ನು ಪ್ರತ್ಯೇಕವಾಗಿ ನಿರ್ವಹಿಸುತ್ತಿದ್ದು, ಈ ಉದ್ದೇಶಕ್ಕಾಗಿ ರಾಜಕೀಯ ಹಾಗೂ ವೈಯಕ್ತಿಕ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಇನ್ಸ್ಟಾಗ್ರಾಂ ಪುಟಗಳನ್ನು ಹೊಂದಿದ್ದಾರೆ ಎಂದರು.
ಆದರೆ ಕೆಲ ಅವಿವೇಕಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ವಿರುದ್ಧ ಅವ್ಯಾಚ್ಯ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ಪೋಸ್ಟ್ ಮಾಡಿರುವುದು ಖಂಡನೀಯವಾಗಿದ್ದು, ಇಂತಹ ಕೃತ್ಯಗಳನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಹರೀಶ್ ಸಬ್ಬೇನಹಳ್ಳಿ, ಆಧುನಿಕ ಯುಗದಲ್ಲಿ ಮದುವೆ, ಹುಟ್ಟುಹಬ್ಬ, ಪ್ರವಾಸ ಸೇರಿದಂತೆ ಸಾಮಾನ್ಯ ಜನರು ಪಾಲ್ಗೊಳ್ಳುವ ಎಲ್ಲಾ ಕಾರ್ಯಕ್ರಮಗಳಲ್ಲಿ ಶಾಸಕರೂ ಭಾಗವಹಿಸುವುದು ಸಹಜ.
ಶಾಸಕರು ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡದಿದ್ದರೆ ಜನರು ಪ್ರಶ್ನಿಸುವ ಹಕ್ಕು ಹೊಂದಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನದ ಬಗ್ಗೆ ಅವಹೇಳನಕಾರಿ ಪೋಸ್ಟ್ಗಳನ್ನು ಮಾಡುವುದು ಸಂಪೂರ್ಣವಾಗಿ ತಪ್ಪು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಶಾಸಕರ ವೈಯಕ್ತಿಕ ವಿಚಾರಗಳ ಬಗ್ಗೆ ಯಾರೇ ಅವ್ಯಾಚ್ಯ ಶಬ್ದ ಬಳಸಿದರೂ ಅವರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
