ಮೂಡಿಗೆರೆ: ವಿದ್ಯಾರ್ಥಿಗಳ ಮೇಲೆ ಗಂಭೀರವಾಗಿ ಹಲ್ಲೆ ಮಾಡಿ ಅಂಡರ್ ಗ್ರೌಂಡ್ ರೂಮಿನಲ್ಲಿ ಕೂಡಿ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ತರುವೆಯಲ್ಲಿ ಬೆಳಕಿಗೆ ಬಂದಿದೆ.

ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಅಂಡರ್ಗ್ರೌಂಡ್ ರೂಮಿನಲ್ಲಿ ಬಂಧಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು, ಸ್ಥಳಕ್ಕೆ ಪೊಲೀಸರು ತೆರಳಿ ವಿಚಾರಿಸಿದಾಗ ಆರೋಪ ದೃಢಪಟ್ಟಿದೆ. ಮಕ್ಕಳು ಆಟವಾಡುತ್ತಿದ್ದರೆಂಬ ಕಾರಣಕ್ಕೆ ಪ್ರಾಚಾರ್ಯರು ಅವರನ್ನು ರೂಮಿನಲ್ಲಿ ಕೂಡಿ ಹಾಕಿ ಉಪವಾಸದಲ್ಲಿಟ್ಟು ಮನಸ್ಸೋ ಇಚ್ಛೆ ಥಳಿತ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯ ವಿದ್ಯಾರ್ಥಿಗಳೆಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಲಾಗಿದೆ ಎಂಬ ಆರೋಪವೂ ಕೇಳಿಬರುತ್ತಿದೆ.

ಅಂಡರ್ಗ್ರೌಂಡ್ ರೂಮಿನಲ್ಲಿ ಸಿಲುಕಿದ್ದ ಮಕ್ಕಳು ಕೂಗಾಡಿದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಎಲ್ಲಾ ಕೊಠಡಿಗಳನ್ನು ಪರಿಶೀಲಿಸಿದಾಗ, ಅಂಡರ್ಗ್ರೌಂಡ್ ರೂಮಿನಲ್ಲಿ ವಿದ್ಯಾರ್ಥಿಗಳು ಪತ್ತೆಯಾಗಿದ್ದಾರೆ.
ಹಲ್ಲೆಗೆ ಒಳಗಾದ ಮಕ್ಕಳ ದೇಹದ ಮೇಲೆ ಗಾಯಗಳ ಗುರುತುಗಳಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರೇಣುಕಾ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಪ್ರಾಚಾರ್ಯ ವಿರುದ್ಧ ಕ್ರಮ ತೆಗೆದುಕೊಂಡು, ಅಮಾನತು ಮಾಡಬೇಕು ಎಂಬ ಆಗ್ರಹ ಪೋಷಕರು, ಸ್ಥಳೀಯರಿಂದ ಕೇಳಿ ಬಂದಿದೆ.
ಘಟನೆ ಸಂಬಂಧ ಪೊಲೀಸರು, ಪ್ರಾಚಾರ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
