ಎನ್.ಆರ್. ಪುರ: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನರಸಿಂಹರಾಜಪುರ ತಾಲೂಕಿನ ಭದ್ರಾ ಹಿನ್ನೀರಿನ ಪ್ರದೇಶದಲ್ಲಿ ಆನೆಗಳ ಹಿಂಡು ಪ್ರತ್ಯಕ್ಷಗೊಂಡಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಲಿಂಗಾಪುರ, ಮುದುಕೂರು ಹಾಗೂ ಚುಂಚನಮನೆ ಸುತ್ತಮುತ್ತಲಿನ ಭಾಗಗಳಲ್ಲಿ ಏಕಕಾಲಕ್ಕೆ ಸುಮಾರು 25ಕ್ಕೂ ಹೆಚ್ಚು ಆನೆಗಳು ಬೀಡುಬಿಟ್ಟಿದ್ದು, ಸಾರ್ವಜನಿಕರು, ರೈತರು ಮತ್ತು ಮೀನುಗಾರರು ಭೀತಿಯಲ್ಲಿ ದಿನ ಕಳೆಯುವಂತಾಗಿದೆ.
ಈ ಬೃಹತ್ ಆನೆಗಳ ಹಿಂಡಿನ ಸಂಚಾರದಿಂದಾಗಿ ತೋಟ ಹಾಗೂ ಗದ್ದೆಗಳಲ್ಲಿನ ಅಪಾರ ಪ್ರಮಾಣದ ಬೆಳೆ ನಾಶವಾಗುವ ಭೀತಿ ಎದುರಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುವ ಆತಂಕದಲ್ಲಿ ರೈತರಿದ್ದಾರೆ. ಜಲಮೂಲಗಳ ಆಸುಪಾಸಿನಲ್ಲಿ ಆನೆಗಳು ಸತತವಾಗಿ ಓಡಾಡುತ್ತಿರುವುದರಿಂದ ದೈನಂದಿನ ಜೀವನಕ್ಕೆ ಭಾರಿ ಅಡಚಣೆಯಾಗಿದ್ದು, ಇಡೀ ಭಾಗದ ಜನರಿಗೆ ದಿಕ್ಕೇ ತೋಚದಂತಾಗಿದೆ.
ಪ್ರಸ್ತುತ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಈ ಭಾಗದ ಸಾರ್ವಜನಿಕರು ಹಾಗೂ ಮೀನುಗಾರರು ತೀರ ಪ್ರದೇಶಗಳಲ್ಲಿ ಓಡಾಡುವಾಗ ಅತ್ಯಂತ ಎಚ್ಚರಿಕೆ ವಹಿಸಬೇಕಾಗಿದೆ. ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳಕ್ಕೆ ಸಿಬ್ಬಂದಿಯನ್ನು ನಿಯೋಜಿಸಬೇಕು ಎನ್ನುವ ಒತ್ತಾಯ ಸ್ಥಳೀಯರಿಂದ ಕೇಳಿ ಬಂದಿದೆ.
