ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಕಣಬೂರು ಬಸ್ ನಿಲ್ದಾಣ ಬಳಿ ಆರೋಪಿಗಳಿಂದ ಗಾಂಜಾ ವಶ ಪಡಿಸಿಕೊಂಡಿರುವ ಘಟನೆ ನಡೆದಿದೆ.
50 ಸಾವಿರ ರೂಪಾಯಿ ಮೌಲ್ಯದ ಗಾಂಜಾ, ಎರಡು ಬೈಕ್ಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರು ಅನುಮಾನಾಸ್ಪದವಾಗಿ ನಿಂತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಎನ್.ಆರ್.ಪುರ ಪೊಲೀಸ್ ಠಾಣಾಧಿಕಾರಿ ನೂತನ್ ಅವರ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿ, ಆರೋಪಿಗಳ ಬಳಿಯಿದ್ದ ಬ್ಯಾಗ್ಗಳಲ್ಲಿ ಗಾಂಜಾ ಹೂ, ಮೊಗ್ಗು ಹಾಗೂ ಸೊಪ್ಪು ಪತ್ತೆಯಾಗಿದೆ. ಬಳಿಕ ವಿಚಾರಣೆ ನಡೆಸಿದಾಗ, ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಕಡಿಮೆ ದರದಲ್ಲಿ ಗಾಂಜಾ ಖರೀದಿಸಿ, ಅದನ್ನು ಎನ್.ಆರ್.ಪುರ ಭಾಗಕ್ಕೆ ತಂದು ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಎರಡು ಬೈಕ್ಗಳಲ್ಲಿ ಬಂದಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ.
ಮಳೆ ಬಂದ ಕಾರಣ ಕೆ.ಕಣಬೂರು ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಪೊಲೀಸರು ಆರೋಪಿಗಳಿಂದ ಗಾಂಜಾ ಹಾಗೂ ಎರಡು ಬೈಕ್ಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಈ ವೇಳೆ ಪಿ.ಎಸ್.ಐ. ನಾಗರಾಜ್ ಸೇರಿದಂತೆ ಸಿಬ್ಬಂದಿಗಳಾದ ಮಧು, ಕೌಸಿಕ್, ಚಂದ್ರು, ಪರಮೇಶ್ ಮತ್ತು ಕಾಂತೇಜ್ ಇನ್ನಿತರರಿದ್ದರು.
