ಚಿಕ್ಕಮಗಳೂರು: ಕಾಫಿನಾಡು ಹಾಗೂ ಮಲೆನಾಡು ಭಾಗದಲ್ಲಿ ಪುಷ್ಯ ಮಳೆ ಅಬ್ಬರ ಮುಂದುವರಿದಿದೆ. ಧಾರಾಕಾರ ಮಳೆಯಿಂದ ಶೃಂಗೇರಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಶೃಂಗೇರಿ ಪಟ್ಟಣದಲ್ಲಿ ಬೆಳಗ್ಗೆಯಿಂದಲೇ ನಿರಂತರ ಮಳೆ ಸುರಿಯುತ್ತಿದೆ. ತುಂಗಾ ನದಿಯ ನೀರಿನ ಮಟ್ಟ ವೇಗವಾಗಿ ಏರಿಕೆಯಾಗಿದ್ದು, ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿವೆ. ಕೆಇಬಿ ವೃತ್ತದ ಆಟೋ ನಿಲ್ದಾಣ, ಪ್ಯಾರಲಲ್ ರಸ್ತೆ, ಸೇರಿದಂತೆ ಹಲವು ರಸ್ತೆಗಳ ಮೇಲೆ ನೀರು ಹರಿದಿದ್ದು, ಜನರು ಆತಂಕದಲ್ಲಿ ದಿನ ಕಳೆಯುವಂತಾಗಿದೆ.
ನದಿ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿರುವುದರಿಂದ ಪ್ರವಾಹ ಭೀತಿ ಹೆಚ್ಚಿದೆ. ಮಳೆ ಇದೇ ರೀತಿ ಮುಂದುವರಿದರೆ ಇನ್ನಷ್ಟು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
