ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಹೈಕೋರ್ಟ್ನ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಜೀವರಾಜ್, ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ಪ್ರಕರಣದ ಬಗ್ಗೆ ಅವಲೋಕಿಸಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ನಿಗದಿಪಡಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದು ಕೇವಲ ಮಧ್ಯಂತರ ಆದೇಶವಾಗಿದ್ದು, ಅಂತಿಮ ತೀರ್ಪಲ್ಲ. ತಡೆಯಾಜ್ಞೆ ನೀಡಿದ ಕಾರಣ, ಹಾಲಿ ಶಾಸಕರೇ ಮುಂದುವರಿಯಲಿದ್ದಾರೆ. ರಾಜಕೀಯದಲ್ಲಿ ಗೆಲುವು-ಸೋಲು ಸಾಮಾನ್ಯ. ಕೋರ್ಟ್ ಆದೇಶವನ್ನು ಎದುರು ನೋಡುತ್ತಿದ್ದೇನೆ ಮತ್ತು ಅಕ್ಟೋಬರ್ 21ರ ನಂತರ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಜೀವರಾಜ್ ಹೇಳಿದ್ದಾರೆ.
