ಚಿಕ್ಕಮಗಳೂರು: ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆಗೈದು ತನ್ನದೇ ತೋಟದಲ್ಲಿ ರಹಸ್ಯವಾಗಿ ಹೂತಿಟ್ಟಿದ್ದ ಪ್ರಕರಣ ಐದು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಪತ್ನಿಯನ್ನು ಹತ್ಯೆಗೈದ ಬಳಿಕ ಮೃತದೇಹವನ್ನು ತೋಟದಲ್ಲೇ ಗುಂಡಿ ತೋಡಿ ಹೂತಿಟ್ಟು, ಬಳಿಕ ಆರೋಪಿ ರಘು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಪ್ರಕರಣದ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸಿ, ತೋಟದಲ್ಲಿ ಹೂತಿಟ್ಟಿದ್ದ ಮೃತದೇಹವನ್ನು ಪತ್ತೆಹಚ್ಚಿ ಹೊರತೆಗೆದಿದ್ದಾರೆ.
ಘಟನೆ ಸ್ಥಳದಲ್ಲಿ ಬಸವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕಂದಾಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಮಹಜರು ನಡೆಸಲಾಗಿದೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಆರಂಭದಲ್ಲಿ ನಾಪತ್ತೆ ಪ್ರಕರಣವೆಂದು ಕಂಡುಬಂದಿದ್ದ ಘಟನೆ, ಐದು ದಿನಗಳ ನಂತರ ಮೃತದೇಹ ಪತ್ತೆಯಾಗುವುದರೊಂದಿಗೆ ಭೀಕರ ಕೊಲೆ ಪ್ರಕರಣ ಎಂಬುದು ದೃಢಪಟ್ಟಿದೆ. ಪತ್ನಿಯನ್ನು ಕೊಲೆಗೈದು ತೋಟದಲ್ಲೇ ಹೂತಿಟ್ಟು, ನಂತರ ಆರೋಪಿ ರಘು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಕರಣದ ದುರಂತ ಅಂತ್ಯಕ್ಕೆ ಸಾಕ್ಷಿಯಾಗಿದೆ.
ಬಸವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
