ಚಿಕ್ಕಮಗಳೂರು: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿದ್ದ ಕಡ್ಡಾಯ ವೈದ್ಯಕೀಯ ಸೇವೆಯನ್ನು ಅನುಷ್ಠಾನಗೊಳಿಸಲಾಗಿದ್ದು, ರಾಜ್ಯದಲ್ಲಿ 1850 ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.
ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಗ್ರಾಮದಲ್ಲಿ ಸೋಮವಾರ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಕಡ್ಡಾಯ ವೈದ್ಯಕೀಯ ಸೇವೆ ಜಾರಿಯಲ್ಲಿದ್ದರೂ ಸಮರ್ಪಕವಾಗಿ ಅನುಷ್ಠಾನವಾಗಿರಲಿಲ್ಲ. ಸದನದಲ್ಲಿ ಈ ಬಗ್ಗೆ ಚರ್ಚಿಸಿ ಕಾನೂನಾತ್ಮಕವಾಗಿ ಇದ್ದ ತೊಡಕುಗಳಿಗೆ ತಿದ್ದುಪಡಿ ತರುವ ಮೂಲಕ ವ್ಯವಸ್ಥೆ ಸರಿಪಡಿಸಲಾಗಿದೆ. ಅಂತೆಯೇ ಖಾಲಿ ಇರುವ ಹುದ್ದೆಗಳಿಗೆ ವೈದ್ಯರನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಿದರು.
ಕಟ್ಟಡ ನಿರ್ಮಾಣವಾದರೆ ಸಾಲದು, ಅಗತ್ಯವಾಗಿ ಅದಕ್ಕೆ ಬೇಕಾಗಿರುವ ಅಗತ್ಯ ಸಲಕರಣೆಗಳು, ವೈದ್ಯರು, ತಾಂತ್ರಿಕ ಸಿಬ್ಬಂದಿ ಹಾಗೂ ಇತರ ವೈದ್ಯಕೀಯ ಸಿಬ್ಬಂದಿಯ ಅವಶ್ಯಕತೆ ಇದ್ದು, ಇಲಾಖೆಯಿಂದ ಸಾಧ್ಯವಾಗುವ ಎಲ್ಲ ಕ್ರಮ ಕೈಗೊಂಡು ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ಕೈಗೊಳ್ಳಲಾಗುವುದು. ಈಗಾಗಲೇ ಸಾಕಷ್ಟು ಉಪಕರಣಗಳನ್ನು ಒದಗಿಸಲು ಮಂಜೂರಾತಿ ನೀಡಲಾಗಿದೆ. ಹೆಚ್ಚುವರಿಯಾಗಿ ಅಗತ್ಯವಿರುವ ಉಪಕರಣಗಳನ್ನು ಒದಗಿಸಲು ಹಣಕಾಸಿನ ವ್ಯವಸ್ಥೆಯನ್ನು ಶೀಘ್ರದಲ್ಲೇ ಕಲ್ಪಿಸುವುದಾಗಿ ತಿಳಿಸಿದರು. ಇದರ ಜೊತೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿಯಿಂದ ಅಗತ್ಯ ಅನುದಾನ ಒದಗಿಸಲು ಅವಕಾಶವಿದ್ದು, ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು.
ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಬ್ದುಲ್ ರೆಹಮಾನ್, ಉಪಾಧ್ಯಕ್ಷರಾದ ಜಿ.ಭವಾನಿ, ಮೈಸೂರು ವಿಭಾಗೀಯ ಜಂಟಿ ನಿರ್ದೇಶಕರಾದ ಡಾ.ಬಿ.ಮಲ್ಲಿಕಾ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ಆರೋಗ್ಯ ಇಲಾಖೆಯ ಸಹ ನಿರ್ದೇಶಕರಾದ ಜಿಲ್ಲಾ ನೋಡಲ್ ಅಧಿಕಾರಿ ಡಾ.ಚಂದ್ರಿಕಾ, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
