ಮೂಡಿಗೆರೆ: ಕಸಾಪ ಮಹಿಳಾ ಘಟಕದ ವತಿಯಿಂದ ಸೆ.4ರಂದು ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ 2ನೇ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 8,30 ಗಂಟೆಗೆ ರಾಷ್ಟçಧ್ವಜಾರೋಹಣವನ್ನು ಶಾಸಕಿ ನಯನಾ ಮೋಟಮ್ಮ, ಪರಿಷತ್ತಿನ ಧ್ವಜಾರೋಹಣ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ನಾಡಧ್ವಜಾರೋಹಣವನ್ನು ಕಸಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಮಂಚೇಗೌಡ ನೆರವೇರಲಿದ್ದಾರೆ. 10ಗಂಟೆಗೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಮ್ಮೇಳನಾಧ್ಯಕ್ಷೆ ಭಾಗ್ಯ ಲಕ್ಷ್ಮಣ್ ಗೌಡ ಅವರ ಮೆರವಣಿಗೆ ನಡೆಯಲಿದೆ. ನಂತರ ಮೈಸೂರಿನ ಸಾಹಿತಿ ಡಾ.ಲತಾರಾಜಶೇಖರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಎಂಎಲ್ಸಿ ಗಾಯಿತ್ರಿ ಶಾಂತೇಗೌಡ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1ಗಂಟೆಗೆ ಮಾಜಿ ಸಚಿವೆ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ಸ್ತ್ರೀ ಎಂದರೆ ಅಷ್ಟೇ ಸಾಕೇ ಗೋಷ್ಠಿ ನಡೆಯಲಿದ್ದು, ಉದ್ಘಾಟನೆಯನ್ನು ಜಿ.ಪಂ. ಸಿಇಒ ಎಚ್.ಎಸ್.ಕೀರ್ತನಾ ನೆರವೇರಿಸಲಿದ್ದಾರೆಂದು ಹೇಳಿದರು.
ಕಸಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಮಂಚೇಗೌಡ ಮಾತನಾಡಿ, ಮಧ್ಯಾಹ್ನ 3 ಗಂಟೆಗೆ ಚಿಕ್ಕಮಗಳೂರು ಐಡಿಎಸ್ಜಿ ಕಾಲೇಜು ಪ್ರಾಂಶುಪಾಲ ಡಾ. ಪುಷ್ಪಭಾರತಿ ಅಧ್ಯಕ್ಷತೆಯಲ್ಲಿ ಅಮರ ಸ್ವರ ಎಸ್.ಜಾನಕಿ ಅವರಿಗಾಗಿ ಗಾನನಮನ ಗೋಷ್ಠಿ ನಡೆಯಲಿದೆ. ನಂತರ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕಳಸದ ಡಾ.ಜಾನಕಿ ಸುಂದ್ರೇಶ್, ಚಿಕ್ಕಮಗಳೂರಿನ ಡಾ.ನಾಗಶ್ರೀ ತ್ಯಾಗರಾಜ್, ತರಿಕೆರೆಯ ಡಾ.ನಾಗಜ್ಯೋತಿ ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಪುರಸ್ಕಾರ, ಜಿಲ್ಲೆಯ ಎಲ್ಲಾ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಿಗೆ ಕನ್ನಡಶ್ರೀ ಪ್ರಶಸ್ತಿ ಹಾಗೂ ಎಲ್ಲಾ ತಾಲೂಕಿನಲ್ಲಿ ಕನ್ನಡದ ಕೆಲಸ ಮಾಡುತ್ತಿರುವವರಿಗೆ ಕನ್ನಡ ಸಿರಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಸಮ್ಮೇಳನಕ್ಕೆ ಎಲ್ಲಾ ಸಾಹಿತ್ಯಾಸಕ್ತಿ, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾ ಗೋಷ್ಠಿಯಲ್ಲಿ ಕಸಾಪ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರೇಕಾ ರವಿರಾಜ್, ಲೇಖಕರ ಬಳಗದ ಅಧ್ಯಕ್ಷೆ ಪ್ರೇಮಾ ಪುಣ್ಯಮೂರ್ತಿ ಉಪಸ್ಥಿತರಿದ್ದರು.
