ಕೊಟ್ಟಿಗೆಹಾರ: ದೇವನಗುಲ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಪರಿಚಿತ ವೃದ್ಧನ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 65 ರಿಂದ 70 ವರ್ಷ ವಯಸ್ಸಿನ ವ್ಯಕ್ತಿಯಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ವೃದ್ಧ ವ್ಯಕ್ತಿ ರಸ್ತೆ ಬದಿಯ ಅಂಗಡಿಗಳ ಸುತ್ತಮುತ್ತ ತಿರುಗಾಡುತ್ತಿದ್ದು, ಯಾರೊಂದಿಗೂ ಸರಿಯಾಗಿ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಊರಿನ ಬಗ್ಗೆ ವಿಚಾರಿಸಿದಾಗ “ಮಂಡ್ಯ” ಎಂದು ಹೇಳುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ. ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಕಾರಣ ಯಾರೂ ಹೆಚ್ಚಿನ ಗಮನ ಹರಿಸಿರಲಿಲ್ಲ ಎಂದು ತಿಳಿದುಬಂದಿದೆ.
ಗ್ರಾಮ ಪಂಚಾಯಿತಿ ತ್ಯಾಜ್ಯ ವಿಲೇವಾರಿ ಪ್ರದೇಶದ ಬಳಿ ನಡೆಯುತ್ತಿದ್ದ ಬೇಲಿ ಕಾಮಗಾರಿಯ ವೇಳೆ ಕಾರ್ಮಿಕರು ಅರಣ್ಯದೊಳಗೆ ಶವ ಕಂಡು ತಕ್ಷಣವೇ ಬಣಕಲ್ ಪೊಲೀಸ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ದಿಲೀಪ್ ಕುಮಾರ್ ಮೃತದೇಹವನ್ನು ಪರಿಶೀಲಿಸಿದ್ದು, ದೇಹದ ಮೇಲೆ ಯಾವುದೇ ಗಾಯ ಅಥವಾ ಅನುಮಾನಾಸ್ಪದ ಗುರುತುಗಳು ಕಾಣಿಸಿಲ್ಲ ಎಂದು ತಿಳಿಸಿದ್ದಾರೆ.
ಬಳಿಕ ಸಮಾಜಸೇವಕ ಆರಿಫ್ ಅವರ ಆಂಬುಲೆನ್ಸ್ ಮೂಲಕ ಶವವನ್ನು ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಜೊತೆಗೆ ಮೃತನ ಗುರುತು ಪತ್ತೆ ಕಾರ್ಯವೂ ನಡೆಯುತ್ತಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತ ವ್ಯಕ್ತಿಯ ಕುಟುಂಬದವರ ಮಾಹಿತಿ ಸಂಗ್ರಹಿಸಲು ಹಾಗೂ ಸಾವಿನ ನಿಖರ ಕಾರಣ ತಿಳಿದುಕೊಳ್ಳಲು ತನಿಖೆ ಮುಂದುವರಿಸಿದ್ದಾರೆ.
