ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಈ ಐಲ್ಯಾಂಡ್ ಸೇರಿದಂತೆ ರಾಜ್ಯದಲ್ಲಿರುವ 116 ಐಲ್ಯಾಂಡ್ ಗಳೂ ನಿರ್ಲಕ್ಷ್ಯಕ್ಕೊಳಗಾಗಿದೆ. ಇಂತಹ ಅತ್ಯದ್ಭುತ ಸಂಪನ್ಮೂಲಗಳಿದ್ದರೂ ನಾವು ಪ್ರವಾಸೋದ್ಯಮದ ದೃಷ್ಟಿಯಿಂದ ಬಳಸಿಕೊಳ್ಳಲು ವಿಫಲರಾಗಿದ್ದೇವೆ. ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಕರಾವಳಿ ಪ್ರವಾಸೋದ್ಯಮದ ಹಿನ್ನೆಲೆಯಲ್ಲಿ ಇಡೀ ದಿನ ವಿಚಾರಸಂಕಿರಣವೊಂದನ್ನು ಆಯೋಜಿಸಲಾಗಿತ್ತು.
ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಕರಾವಳಿ ಜಿಲ್ಲೆಗಳ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೊಳಗಾಗಿರುವ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಬೆಳೆಸಲು ನಾವು ಹೆಜ್ಜೆ ಇಟ್ಟಿದ್ದೇವೆ. ರಾಜ್ಯ ಸರಕಾರದ ಈ ಹೊಸ ಯೋಜನೆಗೆ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ. ನಿಮ್ಮೆಲ್ಲರ ಸಲಹೆ, ಮಾರ್ಗದರ್ಶನದೊಂದಿಗೆ ಮುಂದಿನ ದಿನಗಳಲ್ಲಿ ಈ ಭಾಗವನ್ನು ಅಭಿವೃದ್ದಿಪಡಿಸೊಣಎಂದು ಅವರು ಹೇಳಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಕರಾವಳಿ ಅಭಿವೃದ್ಧಿ ಮಂಡಲಿ ಅಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
