ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿದ್ದು ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಬಿಜೆಪಿ ತಿಳಿಸಿದೆ.
ಇಂದು ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಪಾದಯಾತ್ರೆಗೆ ಚಾಲನೆ ಸಿಗಲಿದ್ದು, ಸೆ.10ಕ್ಕೆ ಬಳ್ಳಾರಿಯಲ್ಲಿ ಕೊನೆಗೊಳ್ಳಲಿದೆ. ಸುಮಾರು 190ರಿಂದ 200 ಕಿಲೋಮೀಟರ್ ವ್ಯಾಪ್ತಿಯಲ್ಲಿ 9 ದಿನಗಳ ಪಾದಯಾತ್ರೆ ನಡೆಯಲಿದೆ.
ಪಾದಯಾತ್ರೆಗೂ ಮುನ್ನ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಜಿಲ್ಲೆಯ ಐತಿಹಾಸಿಕ ಗುರುಗುಂಟಾ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಬಳಿಕ ದೇವರಭೂಪುರ ಬೃಹನ್ಮಠದ ಗಜದಂಡೇಶ್ವರ ಶಿವಾಚಾರ್ಯರಿಂದ ಆಶೀರ್ವಾದ ಪಡೆಯಲಿದ್ದಾರೆ. ವಿಜಯೇಂದ್ರ ಅವರಿಗೆ ಹಲವು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಲಿದ್ದಾರೆ.
ರಾಯಚೂರಿನಿಂದ ಆರಂಭವಾಗಲಿರುವ ಈ ಪಾದಯಾತ್ರೆ ಬಳಿಕ ಕಾರಟಗಿ ಮೂಲಕ ಕೊಪ್ಪಳ ಜಿಲ್ಲೆಯನ್ನು ಪ್ರವೇಶಿಸಲಿದೆ. ಪ್ರತಿ ಕ್ಷೇತ್ರದಿಂದ ಸುಮಾರು 10 ಸಾವಿರ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದಾರೆ.
