ಚಿಕ್ಕಮಗಳೂರು: ಜಿಲ್ಲೆಯ ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆಯನ್ನು ಸರಿಪಡಿಸಿ, ಬಡವರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು.
ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಸಂಘಟನೆಗಳ ಪ್ರಮುಖರೊಂದಿಗೆ ಸಮಾಲೋಚಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭೂಮಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿ ರಚಿಸಲಾಗಿದ್ದು, ಅದರ ನೇತೃತ್ವದಲ್ಲಿ ಮುಂದೆ ಹೋರಾಟ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸಹಸ್ರಾರು ಜನರು ನಿವೇಶನಕ್ಕೆ ಜಾಗವಿಲ್ಲದೆ ಕೂಲಿ ಲೈನ್ಗಳಲ್ಲಿ ವಾಸಿಸುತ್ತಿದ್ದಾರೆ. ಒಂದೇ ಮನೆಯಲ್ಲಿ ಮೂರ್ನಾಲ್ಕು ಕುಟುಂಬಗಳು ವಾಸ ಮಾಡುತ್ತಿವೆ. ಈ ವರೆಗೆ ಈ ಸಮಸ್ಯೆ ಬಗ್ಗೆ ಯಾವ ಸರ್ಕಾರವೂ ಗಮನ ಹರಿಸಿಲಿಲ್ಲ ಎಂದು ದೂರಿದರು.
ಇರುವ ಕಂದಾಯ ಭೂಮಿಯನ್ನು ಅರಣ್ಯ ಮಾಡಲು ಸರ್ಕಾರ ಹೊರಟಿದೆ. ಹುಲ್ಲುಬಂದಿ, ಸಮುದಾಯ ಅರಣ್ಯ, ಸಾಮಾಜಿಕ ಅರಣ್ಯ, ೪(೧) ಮಾಡಲು ಹೊರಟಿದೆ. ಈಗಾಗಲೆ ಮೀಸಲು ಅರಣ್ಯವನ್ನು ರಚಿಸಲಾಗಿದೆ. ಇಷ್ಟೆಲ್ಲಾ ಆದರೂ ಸರ್ಕಾರಿ ಭೂಮಿಯನ್ನು ಬ್ಯಾಂಕ್ಗೆ ಅಡವಿಟ್ಟು ನಿವೇಶನ ರಹಿತರಿಗೆ ಭೂಮಿ ಇಲ್ಲದಂತೆ ಮಾಡಲಾಗುತ್ತಿದೆ. ಇದರ ವಿರುದ್ಧ ಹೋರಾಟ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಹೋರಾಟದಲ್ಲಿ ಯಾವುದೇ ರೀತಿ ಜಾತಿ ವರ್ಗ ಎನ್ನುವುದು ಇರುವುದಿಲ್ಲ. ಯಾರೇ ನಿವೇಶನ, ಮನೆ ರಹಿತರು ಇದ್ದಲ್ಲಿ ಅವರಿಗೆ ಅನುಕೂಲ ಆಗಬೇಕು ಎನ್ನುವುದು ಸಮಿತಿ ಉದ್ದೇಶವಾಗಿದೆ ಎಂದರು.
ಈ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಂತ ಹಂತವಾಗಿ ಕಾಲ್ನಡಿಗೆ ಜಾಥಾ, ಪಂಜಿನ ಮೆರವಣಿಗೆ, ಬಂದ್ ಇನ್ನಿತರೆ ಕಾರ್ಯಕ್ರಮಗಳ ಮೂಲಕ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಮಾಡಲಾಗುತ್ತದೆ ಎಂದು ತಿಲಿಸಿದರು.
ಈ ಬಗ್ಗೆ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಮಾತನಾಡಿದ್ದರೂ ಅದು ನಿಧಾನ ಗತಿಯಲ್ಲಿದೆ. ಇದರ ನಡುವೆ ಎಸ್ಎಫ್ಓಗಳು ಹಳ್ಳಿಗಳಿಗೆ ಬಂದು ಸಮುದಾಯ ಅರಣ್ಯಗಳ ರಚನೆ ಉದ್ದೇಶದಿಂದ ದಾಖಲೆಗಳನ್ನು ಕೊಡುವಂತೆ ಒತ್ತಡ ಹಾಕುತ್ತಿದ್ದಾರೆ. ಎಸ್ಎಪ್ಓಗಳಿಗೆ ನ್ಯಾಯಾಂಗ ಸ್ಥಾನ ಮಾನ ನೀಡಲಾಗಿದೆ. ಅವರು ಸರ್ಕಾರದ ಮಾತನ್ನೇ ಕೇಳುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು, ಅರಣ್ಯ ಸಚಿವರ ಗಮನಕ್ಕೂ ತರಲಾಗುವುದು ಎಂದು ತಿಳಿಸಿದರು.
