ಬೆಂಗಳೂರು : ಮುಡಾ ಅಕ್ರಮ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾ ಮಾಡಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಹಿನ್ನಡೆಯಾಗಿದೆ.
ಮಧ್ಯಾಹ್ನ 12 ಗಂಟೆಗೆ ಕಲಾಪ ಆರಂಭವಾಗುತ್ತಿದ್ದಂತೆ ನ್ಯಾಯಾಧೀಶಯರಾದ ನಾಗಪ್ರಸನ್ನ ಅವರು ಮೊದಲು ಪ್ರಕರಣದ ಸಂಕ್ಷಿಪ್ತ ವಿವರಣೆಯನ್ನು ಓದಿದರು. ರಾಜ್ಯಪಾಲರು ಎಲ್ಲಾ ವಿವೇಚನೆಗಳನ್ನು ಬಳಸಿ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಆದೇಶದಲ್ಲಿ ಯಾವುದೇ ತಪ್ಪಿಲ್ಲ. ಹೀಗಾಗಿ ಅರ್ಜಿಯನ್ನು ವಜಾ ಮಾಡಲಾಗಿದೆ ಎಂದು ಪ್ರಕಟಿಸಿದರು.
ತೀರ್ಪು ಪ್ರಕಟದ ಬಳಿಕ ನ್ಯಾಯಾಧೀಶರ ಬಳಿ ಮನವಿ ಮಾಡಿದ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, 2 ವಾರ ಕಾಲ ತೀರ್ಪಿಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದರು. ನನ್ನ ತೀರ್ಪಿಗೆ ನಾನೇ ತಡೆ ನೀಡುವುದಿಲ್ಲ ಎಂದು ಒಂದೇ ವಾಕ್ಯದಲ್ಲಿ ನ್ಯಾ. ನಾಗಪ್ರಸನ್ನ ಪ್ರತಿಕ್ರಿಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆದಿತ್ತು. 30 ಗಂಟೆಗೂ ಅಧಿಕ ಸಮಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಾದ-ಪ್ರತಿವಾದವನ್ನು ನ್ಯಾಯಾಧೀಶರು ಆಲಿಸಿದ್ದರು. ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಹಾಕಿದ್ದ ಸಿಎಂ ಸಿದ್ದರಾಮಯ್ಯ ಪರ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನೇತೃತ್ವದ ತಂಡ ವಾದ ಮಂಡಿಸಿತ್ತು. ರಾಜ್ಯಪಾಲರ ಕಚೇರಿ ಪರ ಸುಪ್ರೀಂ ಕೋರ್ಟ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಖಾಸಗಿ ದೂರುದಾರ ಟಿ.ಜೆ.ಅಬ್ರಾಹಾಂ, ಎಸ್.ಪಿ. ಪ್ರದೀಪ್ ಕುಮಾರ್ ಮತ್ತು ಸ್ನೇಹಮಯಿ ಕೃಷ್ಣ ಪರ ವಕೀಲರು ಪ್ರತಿವಾದ ಮಂಡಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ವಾದಿಸಿದ್ದರು. ಸೆ. 12ರಂದು ವಾದ ಪೂರ್ಣಗೊಂಡ ನಂತರ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.



