ಶಿವಮೊಗ್ಗ : ಮುಡಾ ಹಗರಣ ಸಂಬಂಧ ತನಿಖೆ ನಡೆಸಿರುವ ಲೋಕಾಯುಕ್ತ ಕೋರ್ಟ್ಗೆ ವರದಿ ನೀಡುವ ತಯಾರಿಯಲ್ಲಿದೆ. ಈ ನಡುವೆ ಮುಖ್ಯಮಂತ್ರಿ ವಿರುದ್ಧದ ಆರೋಪಕ್ಕೆ ಕ್ಲೀಚ್ ಚಿಟ್ ನೀಡಲಾಗುತ್ತಿದೆ ಎಂಬ ವಿಚಾರವೂ ಚರ್ಚೆಯಾಗುತ್ತಿದೆ. ರಾಜಕೀಯ ಒತ್ತಡಕ್ಕೆ ಮಣಿದು ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದರೆ ಬಿಜೆಪಿ ಹೋರಾಟ ನಡೆಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆಂದು ಇ.ಡಿ ಅಧಿಕಾರಿಗಳು ಪ್ರೆಸ್ ನೋಟ್ ಬಿಡುಗಡೆ ಮಾಡಿದ್ದಾರೆ. ಮುಡಾದಲ್ಲಿ ಎಷ್ಟು ಹಗರಣ ಆಗಿದೆ ಎಂದು ಇ.ಡಿ ಮಾಹಿತಿ ಸಂಗ್ರಹ ಮಾಡುತ್ತಿದೆ. ಹೈಕೋರ್ಟ್ ಕೂಡ ಹಗರಣದ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದೆ. ಮುಖ್ಯಮಂತ್ರಿಯವರ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕ್ಲೀನ್ ಚಿಟ್ ಕೊಟ್ಟಿದ್ದಾರೆ ಎಂಬ ಮಾಹಿತಿ ಇದೆ ಎಂದರು.
ಒಂದು ವೇಳೆ ಅದು ನಿಜವಾದರೆ ಬಿಜೆಪಿ ಹೋರಾಟ ಮಾಡಲಿದೆ. ವಾಸ್ತವವಾಗಿ ಸಿದ್ದರಾಮಯ್ಯನವರು ಈಗಾಗಲೆ ನೈತಿಕ ಹೊಣೆ ಹೊತ್ತು ಈಗಾಗಲೇ ರಾಜೀನಾಮೆ ನೀಡಬೇಕಿತ್ತು. ಈಗಲಾದರೂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

